–
ಹುಬ್ಬಳ್ಳಿ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಹಿರಿಯ ನಾಗರಿಕರು ಹಾಗೂ ನಿವೃತ್ತ ನೌಕರರ ಕ್ಷೇಮಾಭಿವೃದ್ಧಿ ಸಂಘದಿಂದ ನಗರದಲ್ಲಿ ರಾಜ್ಯಮಟ್ಟದ ಪ್ರತಿಭಟನಾ ಮೆರವಣಿಗೆ ನಡೆಯಿತು.
ಹುಬ್ಬಳ್ಳಿ ನೆಹರು ಮೈದಾನದಲ್ಲಿ ಸಮಾವೇಶಗೊಂಡ ಹಿರಿಯ ನಾಗರಿಕರು, ಎಲ್ಲ ಹಿರಿಯ ನಾಗರಿಕರು ರಾಷ್ಟ್ರದ ಸಂಪತ್ತು ಎಂದು ಘೋಷಿಸಬೇಕು. ಮಾಸಿಕ 10 ಸಾವಿರ ರೂ. ವೃದ್ಧಾಪ್ಯ ವೇತನ ಕೊಡಬೇಕು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಪ್ರತ್ಯೇಕ ಸಚಿವಾಲಯ, ಪ್ರತ್ಯೇಕ ಬಜೆಟ್ ಮಂಡಿಸಬೇಕು. ರೈಲ್ವೆ ರಿಯಾಯಿತಿ ತಕ್ಞಣ ಆರಂಭಿಸಬೇಕು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಆಗ್ರಹಿಸಿದರು.
ಸಂಘದ ಅಧ್ಯಕ್ಷ ಬಿ.ಎ. ಪಾಟೀಲ ಮಾತನಾಡಿ, ಹಿರಿಯ ನಾಗರಿಕರಿಗೆ ವಿವಿಧ ಸವಲತ್ತು ಕಲ್ಪಿಸುವಂತೆ ಆಗ್ರಹಿಸುತ್ತ ಬಂದಿದ್ದೇವೆ. ಇದುವರೆಗೂ ಸರ್ಕಾರಗಳು ನಮ್ಮ ಬೇಡಿಕೆ ಈಡೇರಿಸಿಲ್ಲ. ಕೂಡಲೇ ನಮ್ಮ ಬೇಡಿಕೆ ಈಡೇರಿಕೆಗೆ ಮುಂದಾಗಬೇಕು. ಇಲ್ಲವಾದರೆ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಎಚ್ಚರಿಕೆ ನೀಡಿದರು.
ರುದ್ರಾಕ್ಷಿಮಠದ ಶ್ರೀ ಬಸವಲಿಂಗ ಸ್ವಾಮೀಜಿ ಮಾತನಾಡಿ, 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರನ್ನು ಗೌರವದಿಂದ ಕಾಣಬೇಕು. ಈ ನಿಟ್ಟಿನಲ್ಲಿ ಸರ್ಕಾರಗಳು ಸೌಲಭ್ಯಗಳನ್ನು ಕಲ್ಪಿಸುವ ಮೂಲಕ ಗೌರವ ಇಮ್ಮಡಿಗೊಳಿಸಬೇಕು ಎಂದು ಆಗ್ರಹಿಸಿದರು.
ನಂತರ ನೆಹರು ಮೈದಾನದಿಂದ ಹೊರಟ ಮೆರವಣಿಗೆ ತಹಸೀಲ್ದಾರ್ ಕಚೇರಿವರೆಗೆ ತೆರಳಿ, ಪ್ರತಿಭಟನಾಕಾರರು ತಹಸೀಲ್ದಾರ್ಗೆ ಮನವಿ ಸಲ್ಲಿಸಿದರು.
ಪ್ರಮುಖರಾದ ಮಹಾಂತೇಶ ಹಿರೇಮಠ, ಡಾ.ಆರ್.ಕೆ. ಮಠದ, ಡಾ. ಸುನಂದಾ ಬೆನ್ನೂರ, ಎ.ವೈ. ಬೆಂಡಿಗೇರಿ, ಡಿ.ಟಿ. ಪಾಟೀಲ, ಪಿ.ಆರ್. ಬಿರಾದಾರ, ಇತರರು ಪ್ರತಿಭಟನೆಯಲ್ಲಿದ್ದರು. ವಿವಿಧ ಜಿಲ್ಲೆಗಳ ನಿವೃತ್ತ ನೌಕರರು, ಹಿರಿಯ ನಾಗರಿಕರು ಭಾಗವಹಿಸಿದ್ದರು.
















Leave a Reply